*ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ; ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್.ಮುನಿಯಪ್ಪ*

*ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ; ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್.ಮುನಿಯಪ್ಪ*

 

*ಬೆಳಗಾವಿ ಸುವರ್ಣ ವಿಧಾನಸೌಧ ಡಿ.11.:ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವÀ ಕೆ.ಹೆಚ್.ಮುನಿಯಪ್ಪ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಸಚಿವ ಕೆ. ಹೆಚ್.ಮುನಿಯಪ್ಪ ವಿಧಾನಸಭೆಯಲ್ಲಿ ವಿವರಿಸಿದರು.
******