ಹುಕ್ಕೇರಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಜನರು ಬೇಸತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ.ಬಿ. ಪಾಟೀಲ್ ಅವರನ್ನು ಭಾರೀ ಅಂತರದಿಂದ ಗೆಲ್ಲಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು.
ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಹಿಡಕಲ್ ಡ್ಯಾಂ ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಎ.ಬಿ. ಪಾಟೀಲ ಪರ ಮತಯಾಚಿಸಿ ಅವರು ಮಾತನಾಡಿದ ರು.
ಸಂಕೇಶ್ವರ ಮತಕ್ಷೇತ್ರದಿಂದ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಎ.ಬಿ. ಪಾಟೀಲರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮುಂದೆಯೂ ಸರ್ವರ ಪ್ರಗತಿಗೆ ಶ್ರಮಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕಾರಣ ಅವರನ್ನು ಆಯ್ಕೆ ಮಾಡಿ ಮತ್ತೊಮ್ಮೆ ವಿಧಾನ ಸಭೆಗೆ ಕಳುಹಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಚಿವ ಶಶಿಕಾಂತ ನಾಯಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಖುಷಿಯಾಗಿದೆ. ಅವರಿಂದ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಂತಾಗಿದೆ. ಅವರ ಹೋರಾಟ ಹಾದಿ ಯುವಕರಿಗೆ ಸ್ಫೂರ್ತಿ. ಇಂತಹ ನಾಯಕರ ಮಾರ್ಗದರ್ಶನ ಪಡೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ತಿಳಿಸಿದರು.
ಈ ಭಾರೀ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರಷ್ಟು ಸತ್ಯ. ಅದರಲ್ಲಿ ಯಾವುದೇ ಸಂದೇಹ ಬೇಡ. ಹೀಗಾಗಿ ಪಕ್ಷಕ್ಕಾಗಿ ಕಾರ್ಯಕರ್ತರು ನಿಷ್ಠೆಯಿಂದ ದುಡಿಯಬೇಕು. ನಮ್ಮ ಅಧಿಕಾರಾದ ಅವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಕಾಂಗ್ರೆಸ್ ಗೆ ಮತ ನೀಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಎ.ಬಿ. ಪಾಟೀಲ್, ಮಾಜಿ ಸಚಿವ ಶಶಿಕಾಂತ ನಾಯಕ ಸೇರಿದಂತೆ ನೂರಾರು ಜನ ಕಾಂಗ್ರೆಸ್ ಮುಖಂಡರು ಇದ್ದರು





























